ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ನಮ್ಮ ಕ್ಲಿನಿಕ್ ಯೋಜನೆಗೆ ಚಾಲನೆ

ಜನವರಿಯೊಳಗೆ 438 ನಮ್ಮ ಕ್ಲಿನಿಕ್ ಆರಂಭಿಸಲಾಗುವುದು. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರಕಾರ ಹೆಚ್ಚು ಆದ್ಯತೆ, ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಬಡವರ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ರಾಜ್ಯ ಸರಕಾರ ಆದ್ಯತೆ ನೀಡಿದ್ದು, ಪ್ರಸಕ್ತ ಸಾಲಿನ ಬಜೆಟ್‍ದಲ್ಲಿ 10 ಸಾವಿರ ಕೋಟಿ ಅನುದಾನ ಮೀಸಲಿಟ್ಟು ವಿನಿಯೋಗಿಸಲಾಗುತ್ತಿದೆ.

ಅವರು ನಿನ್ನೆ ಬೆಳಿಗ್ಗೆ ಹುಬ್ಬಳ್ಳಿ ತಾಲೂಕಿನ ಬೈರಿದೇವರಕೋಪ್ಪದ ರೇಣುಕಾ ನಗರದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಆರೋಗ್ಯ ಯೋಜನೆ ನಮ್ಮ ಕ್ಲಿನಿಕ್ ಉದ್ಘಾಟಿಸಿ ಮತ್ತು ವಿವಿಧ ಜಿಲ್ಲೆಗಳಲ್ಲಿನ ನಮ್ಮ ಕ್ಲಿನಿಕ್ ಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದರು.

ಬಡವರಿಗೆ, ಜನಸಾಮಾನ್ಯರಿಗೆ ಅತ್ಯಂತ ಅವಶ್ಯಕತೆ ಇರುವ ಆರೋಗ್ಯ ಕಾರ್ಯಕ್ರಮ ಇದು. ಶಹರದಲ್ಲಿನ ಬಡವರ ಆರೋಗ್ಯ ದೃಷ್ಟಿಯಿಂದ ಮಹತ್ವದ್ದಾಗಿದೆ. ಬಡವರಿಗೆ ಆರೋಗ್ಯ ಸಮಸ್ಯೆ ಉಂಟಾದರೆ ಖಾಸಗಿ ಆಸ್ಪತ್ರೆಗಳು ಹೆಚ್ಚು ದರ ವಿಧಿಸುವುದರಿಂದ ತೊಂದರೆ ಆಗುತ್ತದೆ.

ನಮ್ಮ ಸರಕಾರ ಸ್ಪಂದನಾಶೀಲವಾಗಿದೆ. ರಾಜ್ಯದ ತುಂಬ ನಗರದ ಜನಸಾಮಾನ್ಯರಿಗಾಗಿ, ಬಡವರಿಗಾಗಿ ನಮ್ಮ ಕ್ಲೀನಿಕ್ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‍ದಲ್ಲಿ 10 ಸಾವಿರ ಕೋಟಿ ಆರೋಗ್ಯ ಕ್ಷೇತ್ರಕ್ಕೆ ಅನುದಾನ ಮೀಸಲಿಟ್ಟು, ಆರೋಗ್ಯ ಕ್ಷೇತ್ರದ ಸುಧಾರಣೆಗೆ ಒತ್ತು ನೀಡಲಾಗಿದೆ. ಮತ್ತು ಪ್ರಸಕ್ತ ಸಾಲಿನಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಸರ್ಕಾರದ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಜನವರಿಯಿಂದ 60 ವರ್ಷ ದಾಟಿದ ಪ್ರತಿಯೊಬ್ಬರಿಗೂ ಉಚಿತವಾಗಿ ಕಣ್ಣು ತಪಾಸಣೆ, ಚಿಕಿತ್ಸೆ ಉಚಿತ ಕನ್ನಡಕ ವಿತರಣೆ ಕ್ರಮವಹಿಸಲಾಗುವುದು.

500 ಕೋಟಿ ವೆಚ್ಚದಲ್ಲಿ ಹುಟ್ಟು ಕಿವುಡರಿಗೆ ಶ್ರವಣಸಲಕರಣೆ ವಿತರಿಸಲಾಗುವುದು. ರೈತರಿಗೆ ಯಶಸ್ವಿನಿ ಯೋಜನೆ ಮುಂದುವರಿಕೆಗೆ ಕ್ರಮವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸುಮಾರು 350 (ಬೆಡ್) ಹಾಸಿಗೆ ಸೌಲಭ್ಯ ಇರುವ ರೂ.250 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಶಾಖೆಗೆ ಕಿಮ್ಸ್ ಆವರಣದಲ್ಲಿ ಬರುವ ಜನವರಿಯಲ್ಲಿ ಶಂಕುಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನವನಗರ ಕ್ಯಾನ್ಸರ್ ಆಸ್ಪತ್ರೆಗೆ ಹೊಸ ಉಪಕರಣ ಖರೀದಿಗೆ 10 ಕೋಟಿ ಅನುದಾನ ನೀಡಲಾಗಿದೆ. ನವನಗರ ಕ್ಯಾನ್ಸರ್ ಆಸ್ಪತ್ರೆ ಬಡವರಿಗೆ ಉತ್ತಮ ಸೇವೆ ನೀಡುತ್ತಿದೆ ಎಂದರು.

ಸಮುದಾಯ ಆಸ್ಪತ್ರೆಗಳ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಮುಂಬರುವ ದಿನಗಳಲ್ಲಿ ಬಡವರಿಗೆ, ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಹೊಸ ಸಂಶೋಧನೆಗಳ ಲಾಭ ಸಿಗುವಂತೆ ಆಗಬೇಕು.

ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಆರೋಗ್ಯ ಕ್ಷೇತ್ರದ ನೂತನ ಸಂಶೋಧನೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸುವಲ್ಲಿ ರಾಜ್ಯ ಸರಕಾರ ಹೆಚ್ಚು ಕಾಳಜಿವಹಿಸಿದೆ.

ಪ್ರತಿ ಜಿಲ್ಲೆಯ ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ಆಗಬೇಕು. ಜಿಲ್ಲೆಯ ಮಕ್ಕಳ ಚಿಕಿತ್ಸೆ, ಆರೋಗ್ಯ ದಾಖಲೆ ಆಗಬೇಕು. ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚುವಂತೆ ಮಾಡಬೇಕು ಎಂದು ಮುಖ್ಯಮಂತಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಳನ್ನು ನೀಡಲಾಗುತ್ತಿದೆ.

ಇಂದು ಏಕಕಾಲಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ 114 ನಮ್ಮ ಕ್ಲಿನಿಕ್ ಉದ್ಘಾಟನೆ ಮಾಡಿರುವುದು ಐತಿಹಾಸಿಕ ದಾಖಲೆಯಾಗಿದೆ. ಪ್ರತಿಯೊಬ್ಬ ಬಡವನ ಬದುಕನ್ನು ಹಸನುಗೊಳಿಸುವ ಕಾರ್ಯವನ್ನು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಮ್ಮ ಸರಕಾರ ಮಾಡುತ್ತಿದೆ ಎಂದರು.

ರಾಜ್ಯದಾದ್ಯಂತ ಉದ್ದೇಶಿತ 438 ಕ್ಲಿನಿಕ್ ಗಳನ್ನು ಬರವ ಜನವರಿ ಒಳಗಾಗಿ ಆರಂಭಿಸಲಾಗುವುದು. ಆಯುಷ್ಮಾನ್ ಭಾರತ ಕಾರ್ಡ್ ಇಡಿ ದೇಶಕ್ಕೆ ಒಂದೇ ಆಗಿದೆ.

ಆರೋಗ್ಯದಲ್ಲಿ ಅಭಿವೃದ್ಧಿ ಆದರೆ ನಾಡು ಸಂಪತ್ಭರಿತವಾಗಲು ಸಾಧ್ಯ. ಆದ್ದರಿಂದ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಲಾಗಿದೆ ಎಂದರು.

Share this article!

Leave a Reply

Your email address will not be published. Required fields are marked *

error: Content is protected !!